ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ನಡೆದ ದರೋಡೆ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ 9 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳು ಮೂರು ನಾಲ್ಕು ತಂಡಗಳೊಂದಿಗೆ ಕಾರ್ಯಾಚರಿಸುತ್ತಿದ್ದರು ಎಂದರು. ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ಮೂಡಬಿದ್ರೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ಹಾಗೂ ಅವರ ಸಿಬ್ಬಂದಿ ಎಪ್ರಿಲ್ 1ರಂದು ಅಬ್ದುಲ್ ರವೂಫ್ (24) ರಾಮಮೂರ್ತಿ(23) ಎಂಬ ಆರೋಪಿಗಳನ್ನು ಬಂಧಿಸಿದ್ದರು.
ಎ.2ರಂದು ಅಶ್ರಫ್ ಪೆರಾಡಿ(27) ಸಂತೋಷ್ (24) ನವೀದ್ (36) ರಮಾನಂದ ಶೆಟ್ಟಿ (48) ಸುಮನ್ (24) ಸಿದ್ದಿಕ್ (27) ಅಲಿಕೋಯ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದರು.
ಬಂಧಿತರಿಂದ ಮಾರುತಿ ಕಾರು, ಆಟೋರಿಕ್ಷಾ, ಇನ್ನೋವಾ ಕಾರು,ಸೇರಿದಂತೆ 11ಮೊಬೈಲ್ ಗಳು ಏರ್ ಗನ್ 4ದ್ವಿಚಕ್ರ ವಾಹನ, ಚಿನ್ನದ ಒಡವಗಳು ಸೇರಿದಂತೆ ಒಟ್ಟು 32.22ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳು ಇನ್ನೂ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ತನಿಖಯಿಂದ ತಿಳಿದು ಬಂದಿದೆ ಎಂದರು.
ಪ್ರಮುಖ ಆರೋಪಿಗಳು ಸೇರಿದಂತೆ ಇನ್ನೂ 15ಕ್ಕೂ ಅಧಿಕ ಆರೋಪಿಗಳು ಭಾಗಿಯಾಗಿರುವ ಮಾಹಿತಿ ಇದ್ದು ಎಲ್ಲರ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.
ಬಂಧಿತರು ಗಾಂಜಾವ್ಯಸನಿಗಳೂ ಆಗಿದ್ದು ವಿವಿಧ ಜಿಲ್ಲೆಗಳಲ್ಲಿ ಜೈಲು ವಾಸ ಹಾಗೂ ವಿವಿಧ ರೀತಿಯ ಕಾರ್ಯಾಚರಣೆ ವೇಳೆ ತಿಳಿದು ಬಂದಿರುವುದಾಗಿ ಪೊಲೀಸ್ ಕಮಿಷನರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಹರಿರಾಂ ಶಂಕರ್, ವಿನಯ್ ಗಾಂವ್ಕರ್, ಎಸಿಪಿ ಮಹೇಶ್ ಕುಮಾರ್ ಉಪಸ್ಥಿತರಿದ್ದರು.