ಪುತ್ತೂರು: ಕಳೆದ ಮಾರ್ಚ್ ತಿಂಗಳಲ್ಲಿ ವಿಟ್ಲ ಪೊಲೀಸ್ ಠಾಣಾ ಎಸ್.ಐ ಮೇಲೆ, ಗುಂಡು ಹಾರಿಸಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ,
ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳ ಪೈಕಿ, ಕೇರಳ ರಾಜ್ಯದ ಉಪ್ಪಳದ ಹೈದರ್ ಎಂಬವನಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿ ಬಿಡುಗಡೆಗೊಳಿಸಿದೆ.
ಕಳೆದ ಮಾರ್ಚ್ 25ರಂದು ಬೆಳಗಿನ ಜಾವ 4:00 ಗಂಟೆಗೆ ಬಂಟ್ವಾಳ ತಾಲೂಕು ಬಾಕ್ರಬೈಲು ಕಡೆಯಿಂದ, ಸಾಲೆತ್ತೂರು ಕಡೆಗೆ ಬರುತ್ತಿದ್ದ ಬಿಳಿ ಬಣ್ಣದ ಕಾರನ್ನು ನಿಲ್ಲಿಸುವಂತೆ ವಿಟ್ಲದ ಅಂದಿನ ಎಸ್.ಐ ವಿನೋದ್ ರೆಡ್ಡಿ ಮತ್ತು ಸಿಬ್ಬಂದಿ ಸೂಚಿಸಿದ್ದಾರೆ.
ಈ ವೇಳೆ ಕಾರಿನ ಚಾಲನಾ ಸೀಟಿನ ಎಡಬದಿಯಲ್ಲಿ ಕುಳಿತಿದ್ದ ವ್ಯಕ್ತಿಯು, ಪಿಸ್ತೂಲಿನಿಂದ ಎಸ್.ಐ ಕಡೆಗೆ, ಗುರಿಯಿಟ್ಟದ್ದನ್ನು ಕಂಡ ಎಸ್.ಐಯವರು, ಬದಿಗೆ ಸರಿದು ಗುಂಡಿನಿಂದ ತಪ್ಪಿಸಿಕೊಂಡಿದ್ದರು. ನಂತರ ಆರೋಪಿಗಳು ಸಂಚರಿಸುತಿದ್ದ ಕಾರು ವೇಗವಾಗಿ ಚಲಿಸಿ,
ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದು, ರಸ್ತೆಬದಿಯ ಕೆಸರಲ್ಲಿ ಹೂತು ಹೋಗಿ ಬಾಕಿಯಾಗಿತ್ತು. ಕಾರಿನಲ್ಲಿದ್ದವರು ತಪ್ಪಿಸಿಕೊಂಡು, ಓಡಿ ಹೋಗಲು ಪ್ರಯತ್ನಿಸಿದಾಗ, ಆರೋಪಿಗಳ ಪೈಕಿ, ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಳಿಕ ಕಾರನ್ನು ಪರಿಶೀಲಿಸಿದಾಗ, ಆರೋಪಿಯಿಂದ ವಿದೇಶಿ ನಿರ್ಮಿತ ಪಿಸ್ತೂಲುಗಳು, ಪಿಸ್ತೂಲ್ಗೆ ಬಳಸುವ ಕಚ್ಛಾ ಗುಂಡುಗಳು, ಬಂದೂಕುಗಳು, ಮಾರಕಾಯುಧಗಳು ಹಾಗೂ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು.