ಪುತ್ತೂರು: ದ.ಕ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ಜಿಲ್ಲೆಯ ಸುಳ್ಯ, ಕಡಬ ಹಾಗು ಪುತ್ತೂರು ತಾಲೂಕುಗಳಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಈ ಮೂರು ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ಗೆ ಕರೆ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ನಿನ್ನೆ ರಾತ್ರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸುವ ತನಕವೂ ಮೃತದೇಹವನ್ನು ಕೊಂಡೊಯ್ಯಲು ಬಿಡುವುದಿಲ್ಲ ಎಂದು ಆಸ್ಪತ್ರೆ ಮುಂಭಾಗ ನೆರೆದಿದ್ದ ಸಂಬಂಧಿಕರು ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪಟ್ಟು ಹಿಡಿದಿದ್ದರು.
ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ. ತಡರಾತ್ರಿ 1.30 ರ ಸುಮಾರಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆಗಮಿಸಿ ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದರು. ಜಿಲ್ಲಾಧಿಕಾರಿ ನೀಡಿದ ಭರವಸೆಯ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.
ಪ್ರವೀಣ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರಿನ ಖಾಗಿ ಆಸ್ಪತ್ರೆಯಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇಂದು ಬೆಳಗ್ಗೆ 9.30ಕ್ಕೆ ಪುತ್ತೂರು ನಗರದಿಂದ ಪಾರ್ಥಿವ ಶರೀರದ ಮೆರವಣಿಗೆ ಹೊರಟು ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ ಪ್ರವೀಣ್ ಮೃತದೇಹವನ್ನು ಕೊಂಡೊಯ್ಯಲು ಹಿಂದೂ ಸಂಘಟನೆಗಳು ಹಾಗೂ ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ವಾಹನ ಸಂಚಾರ ನಿಲ್ಲಿಸಿ ಬಂದ್ ನಡೆಸಬೇಕೆಂದು ಹಿಂದೂಪರ ಸಂಘಟನೆಗಳು ಕರೆ ನೀಡಿವೆ. ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದು ಬಂದೋಬಸ್ತ್ ಕಲ್ಪಿಸಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನಾವಣೆ, ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್, ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಹಾಗೂ ಸುಳ್ಯ, ಕಡಬ ಬೆಳ್ಳಾರೆ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.