ಸಮಾಜ ಸುಧಾರಕ ಬಿ.ಎ. ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ನಿಧನ..
ಮಂಗಳೂರು : ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಹಿರಿಯ ಉದ್ಯಮಿ, ಸಮಾಜ ಸೇವಕ, ಸಮುದಾಯದ ಹಿರಿಯ ನಾಯಕ, ಪ್ರತಿಷ್ಠಿತ ಬಿ.ಎ. ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ಅವರು ಇಂದು ನಿಧನರಾಗಿದ್ದಾರೆ.
89 ವರ್ಷದ ಅಹ್ಮದ್ ಹಾಜಿ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಇಂದು ಸಂಜೆ ತುಂಬೆ ಮಸೀದಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಅಹ್ಮದ್ ಹಾಜಿ ಮುಹಿಯುದ್ದೀನ್ ಅವರು ಪತ್ನಿ, ಮೂವರು ಪುತ್ರರು ಮತ್ತು ಒಬ್ಬ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
1933ರ ಜೂನ್ 18ರಂದು ಮಂಗಳೂರಿನ ಬಂದರಿನಲ್ಲಿ ಅಲ್ಹಾಜ್ ಮುಹಿಯುದ್ದೀನ್ ಚೆಯ್ಯಬ್ಬ ಹಾಗೂ ಮರಿಯಮ್ಮ ಅವರ ಪುತ್ರನಾಗಿ ಜನಿಸಿದ ಅಹ್ಮದ್ ಹಾಜಿ ಮುಹಿಯ್ಯುದ್ದೀನ್ ಮಂಗಳೂರಿನ ಬದ್ರಿಯಾ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮತ್ತು ಗಣಪತಿ ಹೈಸ್ಕೂಲಿನಲ್ಲಿ ಪ್ರೌಢ ಶಿಕ್ಷಣ ಹಾಗೂ ಸರಕಾರಿ ಕಾಲೇಜಿನಲ್ಲಿ ವಾಣಿಜ್ಯ ಪದವಿಯನ್ನು ಪಡೆದರು.
1964ರಲ್ಲಿ ಮಂಗಳೂರಿನಿಂದ 20ಕಿ.ಮೀ. ದೂರದ ತುಂಬೆಯಲ್ಲಿ ಮರದ ಉದ್ಯಮವನ್ನು ಸ್ಥಾಪಿಸಿದರು.
1988ರಲ್ಲಿ ತುಂಬೆಯಲ್ಲಿ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ಸ್ಥಾಪಿಸಿ, 1988ರಲ್ಲೇ ತುಂಬೆ ಪ್ರೌಢಶಾಲೆಯನ್ನು ಪ್ರಾರಂಭಿಸಿದರು.
2004ರಲ್ಲಿ ತುಂಬೆಯಲ್ಲಿ ಬಿ.ಎ. ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಸ್ಥಾಪಿಸಿದರು. 2009ರಲ್ಲಿ ತುಂಬೆಯಲ್ಲಿ ಬಿ.ಎ.ಆಸ್ಪತ್ರೆಯನ್ನು ಆರಂಭಿಸಿದ್ದರು.
ಯಶಸ್ವಿ ಉದ್ಯಮಿಯಾಗಿ, ಶಿಕ್ಷಣ ಪ್ರೇಮಿಯಾಗಿ, ತಾನು ಗಳಿಸಿದ ಸಂಪತ್ತಿನ ಒಂದು ಅಂಶವನ್ನು ಸಮಾಜದ ಉನ್ನತಿಗಾಗಿ ಧಾರೆಯೆರೆದ ಅಹ್ಮದ್ ಹಾಜಿ, ಜಿಲ್ಲೆಯ ಹಲವಾರು ಶಿಕ್ಷಣ, ಧಾರ್ಮಿಕ ಹಾಗೂ ಸಾಮಾಜಿಕ ಸಂಸ್ಥೆಗಳ ಸಂಸ್ಥಾಪಕರಾಗಿ, ಅಧ್ಯಕ್ಷರಾಗಿ, ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸಿದ್ದಾರೆ.
ಅಹ್ಮದ್ ಹಾಜಿ ನಿಧನಕ್ಕೆ ಸಮಾಜದ ಗಣ್ಯರು , ಧಾರ್ಮಿಕ ನಾಯಕರು ಹಾಗೂ ರಾಜಕೀಯ ಧುರೀಣರು ಕಂಬನಿ ಮಿಡಿದಿದ್ದಾರೆ.