ಅನಾರೋಗ್ಯದಿಂದ ಸಾವನ್ನಪ್ಪಿದ ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷೆ ಯಶೋಧ ಬಿ
ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷೆ ಯಶೋಧ ಬಿ.ಅವರು ನಿನ್ನೆ (ಜೂನ್.02) ರಾತ್ರಿ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಪುರಸಭಾ ಅಧ್ಯಕ್ಷೆ-ಉಪಾಧ್ಯಕ್ಷೆಯಾಗಿ ಅಧಿಕಾರ ನಡೆಸಿದ ಮಹಿಳಾ ಜನಪ್ರತಿನಿಧಿ ಯಶೋಧ ಬಿ. ಎರಡು ಬಾರಿ ಬಿಜೆಪಿ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಪುರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.
“ಎರಡು ಬಾರಿಯೂ ಇವರು ಭಂಡಾರಿಬೆಟ್ಟು ಕ್ಷೇತ್ರದಿಂದ ಸ್ಪರ್ಧಿಸಿ ಸದಸ್ಯರಾಗಿ ಚುನಾಯಿತರಾಗಿದ್ದರು.
2001ರಲ್ಲಿ ಪ್ರಥಮ ಅವಧಿಗೆ ಇವರು ಮಹಿಳಾ ಮೀಸಲಾತಿ ಆಯ್ಕೆಯಾಗಿ ಉಪಾಧ್ಯಕ್ಷೆ ಪಟ್ಟ ಅಲಂಕರಿಸಿದರೆ, ಎರಡನೇ ಅವಧಿಯಲ್ಲಿ 2008ರಲ್ಲಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ಅಧ್ಯಕ್ಷೆಯಾಗಿ ಮಿಂಚಿದರು.
ಜೊತೆಗೆ ಜಿಲ್ಲಾ ಮಹಿಳಾ ಮೋರ್ಚಾದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿಯಲ್ಲಿ ಸಕ್ರೀಯರಾಗಿದ್ದುಕೊಂಡು ಪಕ್ಷ ಸಂಘಟನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.
ಇವರು ಸಾಮಾಜಿಕ ಕ್ಷೇತ್ರದಲ್ಲಿ ಮುಂಚೂಣಿಯ ನಾಯಕಿಯಾಗಿದ್ದರು. ಕುಲಾಲ ಸಮುದಾಯದ ಮುಂಚೂಣಿ ನಾಯಕಿಯಾಗಿದ್ದು, ಕುಲಾಲ ಸಂಘಟನೆಯಲ್ಲಿ ವಿವಿಧ ಜವಾಬ್ದಾರಿಯನ್ನು ವಹಿಸಿಕೊಂಡು ಸಮರ್ಥವಾಗಿ ನಿರ್ವಹಿಸಿದವರು.
ಪುತ್ತೂರು ಕುಂಬಾರರ ಗುಡಿಕೈಗಾರಿಕೆ ಸಂಘ.ನಿ.ಇದರ ಮಾಜಿ ನಿರ್ದೇಶಕರಾಗಿಯೂ ಕೆಲಸ ಮಾಡಿದವರು.
ಯಶೋಧ ಅವರ ಸಾವಿಗೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು,
ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮತ್ತಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.