ಮಂಗಳೂರು: ರಾಜ್ಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಕೋವಿಡ್ ಸಾವಿನ ವಿಚಾರದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಗುರುವಾರ ದಕ ಜಿಲ್ಲೆಯಲ್ಲಿ 10 ಸಾವು ಸಂಭವಿಸಿದೆ.
ಇದರಲ್ಲಿ ಮಂಗಳೂರು ಮೂರು, ಬೆಳ್ತಂಗಡಿ, ಬಂಟ್ವಾಳ ಹಾಗೂ ಪುತ್ತೂರು ತಲಾ ಒಂದು, ಸುಳ್ಯ ಎರಡು, ಹೊರ ಜಿಲ್ಲೆಯ ಎರಡು ಮಂದಿ ಮೃತಪಟ್ಟಿದ್ದಾರೆ.
ಕೋವಿಡ್ ಪಾಸಿಟಿವ್ ಪ್ರಕರಣಗಳು 269 ಇದ್ದರೆ ಆಸ್ಪತ್ರೆಯಿಂದ ಬಿಡುಗಡೆಯಾದವರು 328 ಮಂದಿ ಇದ್ದಾರೆ.
ಜಿಲ್ಲೆಯ ಪಾಸಿಟಿವಿಟಿ ದರ ಶೇ.2.51ಕ್ಕೆ ಏರಿಕೆ ಕಂಡಿದೆ. ಮಂಗಳೂರಿನಲ್ಲಿ ಎರಡು ಕಂಟೈನ್ ಮೆಂಟ್ ವಲಯ ಘೋಷಣೆ ಮಾಡಲಾಗಿದೆ.
ವೀಕೆಂಡ್ ಕರ್ಫ್ಯೂ
ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಈ ತಿಂಗಳಾಂತ್ಯದವರೆಗೆ ಘೋಷಿಸಲಾಗಿದ್ದು, ಆಗಸ್ಟ್ 27ರ ರಾತ್ರಿಯಿಂದ ಆಗಸ್ಟ್ 30 ಬೆಳಗಿನವರೆಗೆ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ.
ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗಿನವರೆಗೆ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದ್ದು, ಬೆಳಗ್ಗೆ 5ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲ.
ತುರ್ತು ಸೇವೆಗೆ ಅನುಮತಿ ನೀಡಲಾಗಿದೆ. ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಪಾರ್ಸೆಲ್ ಕೊಂಡೊಯ್ಯಲು ಮಾತ್ರವೇ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.