ಕಲಬುರ್ಗಿ ಕಮಲಾಪುರ ತಾಲೂಕಿನಲ್ಲಿ ವೈದ್ಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ..
ಕಲಬುರ್ಗಿ: ಕೊರೊನಾ ವಾರಿಯರ್ಸ್ ಮೇಲಾಗುತ್ತಿರುವ ದಾಳಿಗಳು ಮತ್ತೆ ಮುಂದುವರೆಯುತ್ತಿವೆ. ಚಿತ್ತಾಪುರ ತಾಲೂಕಿನ ಆಶಾ ಕಾರ್ಯಕರ್ತೆಯ ಮೇಲಿನ ಹಲ್ಲೆ ಮಾಸುವ ಮುನ್ನವೇ,
ಇದೀಗ ಕಲಬುರ್ಗಿಯ ಕಮಲಾಪುರ ತಾಲೂಕಿನಲ್ಲಿ ಮತ್ತೊಂದು ಹಲ್ಲೆ ಘಟನೆ ನಡೆದಿದೆ.
ವೈದ್ಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ.
ಈ ವೇಳೆ ನಡೆದ ಕಲ್ಲು ತೂರಾಟದಿಂದಾಗಿ ಪೊಲೀಸ್ ವಾಹನ, ಆ್ಯಂಬುಲೆನ್ಸ್ ಹಾಗೂ ಮತ್ತಿತರ ವಾಹನಗಳು ಜಖಂ ಆಗಿದೆ.
ಕಲಬುರ್ಗಿ ಜಿಲ್ಲೆಯಲ್ಲಿ ಕೊರೊನಾ ದಿನೇ ದಿನೇ ಹೆಚ್ಚಾಗಲಾರಂಭಿಸಿದೆ. ಅದರಲ್ಲಿಯೂ ಮಹಾರಾಷ್ಟ್ರದಿಂದ ವಾಪಸ್ಸಾದ ವಲಸಿಗರಿಂದ ಸೋಂಕು ವ್ಯಾಪಕವಾಗಿ ಹರಡಲಾರಂಬಿಸಿದೆ.
ಕೊರೊನಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸರು, ಮತ್ತಿತರ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ.
ಇಂತಹ ಕೊರೊನಾ ವಾರಿಯರ್ಸ್ ಮೇಲೆ ಕಲಬುರ್ಗಿ ಜಿಲ್ಲೆಯಲ್ಲಿ ದಾಳಿ ನಡೆದಿದೆ. ಕಮಲಾಪುರ ತಾಲೂಕಿನ ಮರಮಂಚಿ ತಾಂಡಾದಲ್ಲಿ ವೈದ್ಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಲಾಗಿದೆ.
ಮುಂಬೈಯಿಂದ ವಾಪಸ್ಸಾದ ವಲಸಿಗರ ಪೈಕಿ 14 ಜನರಿಗೆ ಪಾಸಿಟಿವ್ ವರದಿ ಬಂದಿತ್ತು. ಈ ಹಿನ್ನಲೆಯಲ್ಲಿ ಸೋಂಕಿತರನ್ನು ಆಸ್ಪತ್ರೆಗೆ ಕರೆತರಲು ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸರ ಜೊತೆ ತಾಂಡಾಕ್ಕೆ ತೆರಳಿತ್ತು.
ಈ ವೇಳೆ ತಾಂಡಾದ ನಿವಾಸಿಗಳು ಏಕಾಏಕಿ ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.
ಪೊಲೀಸ್ ವಾಹನ, ಆ್ಯಂಬುಲೆನ್ಸ್, ಆರೋಗ್ಯ ಇಲಾಖೆ ಸಿಬ್ಬಂದಿಯ ವಾಹನಗಳ ಮೇಲೆ ಕಲ್ಲು ತೂರಲಾಗಿದ್ದು, ಗಾಜುಗಳು ಪುಡಿ ಪುಡಿಯಾಗಿವೆ.
ಈ ವೇಳೆ ವೈದ್ಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.