ಮಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ತಾನು ಕರ್ನಾಟಕಕ್ಕೆ ನಿರಂತರವಾಗಿ ಭೇಟಿ ನೀಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
ನಿನ್ನೆ ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನಿನಲ್ಲಿ ಸಮಾವೇಶದ ಬಳಿಕ ಹೆಲಿಪ್ಯಾಡ್ ಬಳಿ ಪಕ್ಷದ ಕೋರ್ ಕಮಿಟಿ ಸದಸ್ಯರ ಜತೆಗೆ ಸುಮಾರು 45 ನಿಮಿಷ ಚರ್ಚೆ ನಡೆಸಿದ ಅವರು, ರಾಜ್ಯದಲ್ಲಿನ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪಕ್ಷದಿಂದ ನಡೆಯುತ್ತಿರುವ ಸಂಘಟನಾತ್ಮಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಮಂಗಳೂರಿನ ಸಮಾವೇಶದಲ್ಲಿ ಸೇರಿದ್ದ ಜನಸ್ತೋಮ ಹಾಗೂ ಬಿಜೆಪಿ ಕಾರ್ಯಕರ್ತರ ಉತ್ಸಾಹದ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯದೆಲ್ಲೆಡೆ ಶಕ್ತಿ ಪ್ರದರ್ಶನ ನೀಡುವ ಮೂಲಕ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಈಗಿಂದಲೇ ಕಾರ್ಯೋನ್ಮುಖರಾಗುವಂತೆ ಮೋದಿ ಸೂಚಿಸಿದರು.
ಕೇಂದ್ರ ಮತ್ತು ರಾಜ್ಯ ಸರಕಾರಗಳ ಯೋಜನೆಗಳ ಅನುಷ್ಠಾನದ ಬಗ್ಗೆ ವಿವರ ಪಡೆದ ಅವರು ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ನೀಡ ಬೇಕು, ಜಿಲ್ಲಾ ಮತ್ತು ವಿಭಾಗವಾರು ಸಮಾವೇಶ ಆಯೋಜಿಸ ಬೇಕು. ಸರಕಾರದ ಸಾಧನೆಯನ್ನು ಮನೆಮನೆಗೆ ತಲುಪಿಸಲು ಸೂಕ್ತ ಕಾರ್ಯ ಯೋಜನೆ ರೂಪಿಸಬೇಕು.
ಗುಜರಾತ್ ಚುನಾವಣೆ ಬಳಿಕ ನಮ್ಮ ಗುರಿ ಕರ್ನಾಟಕ. ಅಭಿವೃದ್ಧಿಯ ಮಂತ್ರದೊಂದಿಗೆ ನಾವು ಚುನಾವಣೆಗೆ ಹೋಗಬೇಕಿದೆ.
ಆ ನಿಟ್ಟಿನಲ್ಲಿ ರಾಜ್ಯ ಸರಕಾರ ಎಲ್ಲ ರೀತಿಯಲ್ಲೂ ಸಜ್ಜಾಗಬೇಕೆಂದರು.
ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೋರ್ ಕಮಿಟಿ ಸದಸ್ಯರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಪ್ರಹ್ಲಾದ್ ಜೋಷಿ, ಜಗದೀಶ್ ಶೆಟ್ಟರ್, ಗೋವಿಂದ ಕಾರ ಜೋಳ, ಡಿ.ವಿ. ಸದಾನಂದ ಗೌಡ, ಅರುಣ್ ಸಿಂಗ್, ಸಿ.ಟಿ.ರವಿ. ಕೆ.ಎಸ್.ಈಶ್ವರಪ್ಪ, ಶ್ರೀರಾಮುಲು, ಆರ್.ಅಶೋಕ್ ,ಡಾ| ಅಶ್ವಥ್ ನಾರಾಯಣ್, ರಾಜೇಶ್ ಜಿ.ವಿ, ಡಿ.ಕೆ.ಅರುಣಾ, ನಿರ್ಮಲ್ ಕುಮಾರ್ ಸುರಾನಾ ಮತ್ತಿತರಿದ್ದರು.