ಜಿಲ್ಲೆಯಲ್ಲಿ 95 ಪರೀಕ್ಷೆ ಕೇಂದ್ರಗಳ ನಿಗದಿ: ಪ್ರತಿ ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ….
ಮಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆ ಜೂನ್ 25 ರಿಂದ ಜೂನ್ 4ರ ವರೆಗೆ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30,835 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದರು.
ಎಸ್ಎಸ್ಎಲ್ ಸಿ- 2020 ಪರೀಕ್ಷಾ ಪೂರ್ವ ತಯಾರಿ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ ಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿ ಬಸ್ನಲ್ಲಿ ಪ್ರಯಾಣಿಸಬಹುದು ಎಂದರು.
ದ.ಕ. ಜಿಲ್ಲೆಯಲ್ಲಿ 95 ಪರೀಕ್ಷೆ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಹೆಚ್ಚುವರಿಯಾಗಿ 19 ಪರೀಕ್ಷೆ ಕೇಂದ್ರಗಳು ಕಾದಿರಿಸಲಾಗಿದ್ದು,
ಸರಕಾರದ ಮಾರ್ಗಸೂಚಿಯಂತೆ ಪ್ರತಿ ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮುನ್ನ ಥರ್ಮಲ್ ಸ್ಕ್ರೀನ್ ಮೂಲಕ ಪರೀಕ್ಷಿಸಲಾಗುತ್ತದೆ. ವಿದ್ಯಾರ್ಥಿಗೆ ರೋಗದ ಯಾವುದೇ ಲಕ್ಷಣ ಕಂಡು ಬಂದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
ಇದಕ್ಕಾಗಿ 102 ವಿಶ್ರಾಂತಿ ಕೊಠಡಿ ಸಿದ್ಧಪಡಿಸಲಾಗುವುದು ಎಂದರು. ಇನ್ನು ಕಾಸರಗೋಡಿನ 345 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದು,
ಹಾಲ್ ಟಿಕೆಟ್ ತೋರಿಸಿ ಗಡಿ ಪ್ರವೇಶಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಇನ್ನು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಕೂಡ ಜೂ. 18ರಂದು ನಡೆಯಲಿದ್ದು, ಜಿಲ್ಲೆಯಲ್ಲಿ 26,704 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
51 ಪರೀಕ್ಷೆ ಕೇಂದ್ರಗಳನ್ನು ಗುರುತಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯವಾದ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಇದೇ ಸಂದರ್ಭದಲ್ಲಿ ಸೂಚಿಸಿದರು.