DAKSHINA KANNADA
ಉಪ್ಪಿನಂಗಡಿ: ತಲವಾರು ದಾಳಿ ಪ್ರಕರಣ -ಎರಡು FIR ದಾಖಲು, ಆರೋಪಿಗಳಿಗೆ ಶೋಧ
ಉಪ್ಪಿನಂಗಡಿ: ನಿನ್ನೆ ರಾತ್ರಿ ತಂಡವೊಂದು ಐವರ ಮೇಲೆ ತಲವಾರು ಹಾಗೂ ರಾಡ್ನಿಂದ ಹಲ್ಲೆ ನಡೆಸಿದ ಘಟನೆಯ ಕುರಿತಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಈ ಬಗ್ಗೆ ದೂರು ನೀಡಿರುವ ಮುಹಮ್ಮದ್ ಫಯಾಝ್ ಎಂಬವರು ತಾನು ಭಾನುವಾರ ಸಂಜೆ 7.30ರ ವೇಳೆಗೆ ಅಂಡೆತ್ತಡ್ಕದಲ್ಲಿರುವ ಮಂಜುಶ್ರೀ ಸ್ಟೋರ್ಗೆ ತನ್ನ ಸ್ನೇಹಿತ ಅಫೀಝ್ನೊಂದಿಗೆ ದಿನಸಿ ಖರೀದಿ ಮಾಡಲು ತೆರಳಿದ್ದು,
ಅಲ್ಲಿಗೆ ಬಂದ ಆರೋಪಿಗಳಾದ ಜಯರಾಮ್, ಸಂದೀಪ್, ನವೀನ್, ಕಾರ್ತಿಕ್, ಸುಮಂತ್ ಶೆಟ್ಟಿ, ಪ್ರೀತಮ್, ಲತೇಶ್ ನೂಜಿ ಎಂಬವರು ಕೈಯಲ್ಲಿ ರಾಡ್ಗಳನ್ನು ಹಿಡಿದುಕೊಂಡು ಬಂದು ನಮಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ರಾಡ್ನಿಂದ ಹಲ್ಲೆ ನಡೆಸಿದ್ದಲ್ಲದೆ,
ನಾವು ತಪ್ಪಿಸಿಕೊಂಡು ಓಡಿ ಹೋಗುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ನಮ್ಮನ್ನು ಅಟ್ಟಾಡಿಸಿಕೊಂಡು ಬಂದಿದ್ದಾರೆ.
ಈ ಸಂದರ್ಭ ಆರೋಪಿ ಜಯರಾಮ ಎಂಬಾತ ನನ್ನನ್ನು ದೂಡಿ ಹಾಕಿದ್ದರಿಂದ ನನ್ನ ಎರಡೂ ಕಾಲಿನ ಮೊಣಗಂಟಿಗೆ ಹಾಗೂ ಕೈಗೆ ಗಾಯವುಂಟಾಗಿದೆ.
ಅಲ್ಲದೆ, ನನ್ನ ಕಿಸೆಯಲ್ಲಿದ್ದ ಮೊಬೈಲ್ ಫೋನ್ ಜಖಂಗೊಂಡು ಎಂಟು ಸಾವಿರ ರೂ. ನಷ್ಟವುಂಟಾಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಇನ್ನೊಂದು ಪ್ರತ್ಯೇಕ ದೂರು ದಾಖಲಿಸಿರುವ ಅಬ್ದುಲ್ ಝಕಾರಿಯಾ ಎಂಬವರು ಭಾನುವಾರ ರಾತ್ರಿ ಸುಮಾರು 8 ಗಂಟೆಗೆ ತಾನು ಹಾಗೂ ಸಿದ್ದೀಕ್ ಅವರೊಂದಿಗೆ ಇಕ್ಬಾಲ್ ಜಿ.
ಅವರ ದಿನಸಿ ಅಂಗಡಿಯ ಬಳಿ ಇರುವಾಗ ಆರೋಪಿಗಳಾದ ಜಯರಾಮ, ಸಂದೀಪ್, ಸುಪ್ರೀತ್, ಪ್ರೀತಮ್, ಲತೇಶ್ ಹಾಗೂ 30 ಜನ ದ್ವಿಚಕ್ರ ವಾಹನ ಸವಾರರು ಅಲ್ಲಿಗೆ ಕೈಯಲ್ಲಿ ತಲವಾರು, ರಾಡ್ಗಳನ್ನು ಹಿಡಿದುಕೊಂಡು ಬಂದಿದ್ದು,
ಇವರಲ್ಲಿ ಆರೋಪಿ ಸಂದೀಪ್ ಕುಪ್ಪೆಟ್ಟಿ ಎಂಬಾತನು ಬೈಕ್ನಲ್ಲಿ ಸಹಸವಾರನಾಗಿದ್ದ ಆರೋಪಿ ಜಯರಾಮ ಎಂಬಾತನನಲ್ಲಿ ಸಿದ್ದೀಕ್ನನ್ನು ತೋರಿಸಿ ಇವನಾ? ಎಂದು ಕೇಳಿದ್ದು,
ಆಗ ಆತ ಇವನಲ್ಲ ಎಂದು ಹೇಳಿದಾಗ ಸಿದ್ದೀಕ್ಗೆ ತಲವಾರಿನಿಂದ ಕೈಗೆ, ಬೆನ್ನಿಗೆ ಆರೋಪಿಗಳು ಕಡಿದಿದ್ದಾರೆ.
ಆಗ ಇತರರು ರಾಡ್ನಿಂದ ಹಲ್ಲೆ ನಡೆಸಿದ್ದಾರೆ. ಆ ಸಂದರ್ಭ ಅವರ ತಂಡದ ಒಬ್ಬಾತ ನನ್ನನ್ನು ಹಿಡಿದುಕೊಂಡಿದ್ದು, ಜಯರಾಮನು ತನ್ನ ತಲೆಯ ಹಿಂಭಾಗಕ್ಕೆ ಕಡಿದಾಗ, ಸಂದೀಪ್ ಎಂಬಾತ ತನಗೆ ರಾಡ್ನಿಂದ ಕೈಗೆ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿ,
ಕೊಲೆಗೆ ಯತ್ನಿಸಲಾಗಿದೆ. ಈ ಸಂದರ್ಭ ನಾನು ಹಾಗೂ ಸಿದ್ದೀಕ್ ಅವರಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾಗ ನಮ್ಮನ್ನು ಆರೋಪಿಗಳು ದ್ವಿಚಕ್ರ ವಾಹನಗಳಲ್ಲಿ ಹಿಂಬಾಲಿಸಿಕೊಂಡು ಬಂದಿದ್ದು,
ಆಗ ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ ಅಯೂಬ್ ಖಾನ್ರ ತಲೆಯ ಭಾಗಕ್ಕೂ ಆರೋಪಿ ಜಯರಾಮ ಕಡಿದು, ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಬಳಿಕ ಆಸುಪಾಸಿನ ಜನರು ಸೇರುವುದನ್ನು ಕಂಡು ಆರೋಪಿಗಳು ಪರಾರಿಯಾದರು ಎಂದು ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ ಅಯೂಬ್ ಖಾನ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅಬ್ದುಲ್ ಝಕಾರಿಯಾ ಹಾಗೂ ಸಿದ್ದೀಕ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.