DAKSHINA KANNADA
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ “ಅಬ್ದುಲ್ ಮಜೀದ್ ಕುಟ್ಟಿ” ಭಯೋತ್ಪಾದನಾ ನಿಗ್ರಹ ದಳದ ವಶಕ್ಕೆ..!
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ “ಅಬ್ದುಲ್ ಮಜೀದ್ ಕುಟ್ಟಿ” ಭಯೋತ್ಪಾದನಾ ನಿಗ್ರಹ ದಳದ ವಶಕ್ಕೆ..!
ಅಹಮದಾಬಾದ್: ಭಾರತದ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿರುವ ಕ್ರಿಮಿನಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಚರ ಅಬ್ದುಲ್ ಮಜೀದ್ ಕುಟ್ಟಿ ಕೊನೆಗೂ ಬಂಧಿಸಲಾಗಿದೆ.
ಕಳೆದ 24 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಈ ಉಗ್ರನನ್ನ ಇಂದು ಭಯೋತ್ಪಾದನಾ ನಿಗ್ರಹ ದಳ ಜಾರ್ಖಂಡ್ನಲ್ಲಿ ಬಂಧಿಸಿದೆ.ಅಬ್ದುಲ್ ಮಜೀದ್ ಕುಟ್ಟಿ ಮೂಲತ: ಕೇರಳದವನಾಗಿದ್ದಾನೆ. 1996ರ ಶಸ್ತ್ರಾಸ್ತ ಸಂಗ್ರಹ ಪ್ರಕರಣದ ಸುಳಿಯಲ್ಲಿ ಸಿಲುಕಿಕೊಂಡಿದ್ದ ಈತ 106 ಪಿಸ್ತೂಲ್, 750 ಸಿಡಿಮದ್ದುಗಳು ಮತ್ತು 4 ಕೆ.ಜಿ RDX ಸಂಗ್ರಹಿಸಿದ ಆರೋಪ ಎದುರಿಸುತ್ತಿದ್ದ.
ಇದೇ ಪ್ರಕರಣದ ಉಳಿದ ಆರೋಪಿಗಳನ್ನ 1996ರಲ್ಲೇ ಬಂಧಿಸಲಾಗಿತ್ತು. ಅವ್ರ ವಿಚಾರಣೆ ಸಮಯದಲ್ಲಿ ಈತನ ಹೆಸರು ಕೇಳಿ ಬಂದಿತ್ತು. ಅಂದು ತಲೆಮರೆಸಿಕೊಂಡಿದ್ದ ಈ ಕ್ರಿಮಿನಲ್ ಬರೋಬ್ಬರಿ 24 ವರ್ಷಗಳ ನಂತ್ರ ಬಂಧನಕ್ಕೊಳಗಾಗಿದ್ದಾನೆ.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.
DAKSHINA KANNADA
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.
ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.
DAKSHINA KANNADA
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.
ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.