ಬೆಳಗಾವಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿಗೆ ಜೀವ ಬೆದರಿಕೆಯೊಡ್ಡಲಾಗಿದೆ. ಗಡ್ಕರಿ ಅವರ ಜನಸಂಪರ್ಕ ಕಚೇರಿಗೆ ಮೂರು ಬಾರಿ ಕರೆ ಮಾಡಿ ಈ ಧಮ್ಕಿ ಹಾಕಲಾಗಿದೆ ಎನ್ನಲಾಗಿದೆ. ಪ್ರಸ್ತುತ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.
ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಪ್ರಕರಣ ಸಂಬಂಧ ಹಿಂಡಲಗಾ ಜೈಲಿನಲ್ಲಿದ್ದ ಕೈದಿ ಜಯೇಶ್ ಪೂಜಾರಿ ಬಳಿಯ ಡೈರಿಯನ್ನು ಜಪ್ತಿ ಮಾಡಲಾಗಿದೆ.
ನಾಗ್ಪುರ ನಗರ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಬಗ್ಗೆ ಮಾಹಿತಿ ನೀಡಿದ್ದಾರೆ .
ಜೈಲು ಅಧಿಕಾರಿಗಳ ಅನುಮತಿ ಪಡೆದು ಶಂಕಿತ ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ.
2008ರಲ್ಲಿ ಕೊಲೆ ಆರೋಪದಡಿ ಜಯೇಶ್ ಎಂಬ ಆರೋಪಿ ಜೈಲು ಸೇರಿದ್ದ. 2018ರಲ್ಲಿ ಆತನಿಗೆ ಗಲ್ಲು ಶಿಕ್ಷೆ ಪ್ರಕಟವಾಗಿತ್ತು.
ಜೈಲಿನಿಂದ ತಪ್ಪಿಸಿಕೊಳ್ಳಲು ಸಹ ಆತ ಯತ್ನಿಸಿದ್ದ ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ ಕೈದಿ ಜಯೇಶ್ ಪೂಜಾರಿ 2008ರಲ್ಲಿ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಮತ್ತು ದರೋಡೆ ಪ್ರಕರಣದಲ್ಲಿ ಜೈಲು ಸೇರಿದ್ದ.
12-08-2016ರಲ್ಲಿ ಮಂಗಳೂರು 5ನೇ ಸೆಷನ್ಸ್ ನ್ಯಾಯಾಲಯ ಜಯೇಶ್ ಪೂಜಾರಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. 2017ರಲ್ಲಿ ಗಲ್ಲು ಶಿಕ್ಷೆ ಜೀವಾವಧಿ ಶಿಕ್ಷೆಯಾಗಿ ಮಾರ್ಪಾಡಾಗಿತ್ತು.
ಈತ ಮೂಲತಃ ಕಡಬಾ ತಾಲೂಕು ಶಿರಾಡಿ ನಿವಾಸಿ. 2018ರಲ್ಲಿ ಅಂದಿನ ಉತ್ತರ ವಲಯ ಐಜಿಪಿ ಅಲೋಕ್ ಕುಮಾರ್ ಅವರಿಗೆ ಜೀವ ಬೆದರಿಕೆ ಕರೆ ಮಾಡಿದ್ದ ಈತ 1-5-2019ರಂದು ಮೈಸೂರು ಜೈಲಿಗೆ ಸ್ಥಳಾಂತರಗೊಂಡಿದ್ದ.
ಬಳಿಕ 14-09-2021ರಂದು ಮರಳಿ ಬೆಳಗಾವಿ ಹಿಂಡಲಗಾ ಜೈಲಿಗೆ ಸ್ಥಳಾಂತರಗೊಳಿಸಲಾಗಿತ್ತು.ಬೆಳಗಾವಿಯಿಂದಲೇ ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಇಲಾಖೆಯ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ ಮಾಡಲಾಗಿದೆ.
ಹಿಂಡಲಗಾ ಸೆಂಟ್ರಲ್ ಜೈಲಿನ ಕೈದಿಯೇ ಶನಿವಾರ ಗಡ್ಕರಿ ಮೊಬೈಲ್ಗೆ ಫೋನ್ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ.
ಈ ವಿಚಾರವನ್ನು ಗಡ್ಕರಿ ಮಹಾರಾಷ್ಟ್ರದ ನಾಗ್ಪುರ ಪೊಲೀಸರ ಗಮನಕ್ಕೆ ತಂದಿದ್ದು, ಆರೋಪಿ ಶೋಧಕ್ಕೆ ನಾಗ್ಪುರ ಪೊಲೀಸರು ಹಿಂಡಲಗಾ ಜೈಲಿಗೆ ಬಂದಿದ್ದಾರೆ. ನಾಗ್ಪುರ ಪೊಲೀಸರಿಗೆ ಕೊಲ್ಲಾಪುರ, ಸಾಂಗ್ಲಿ ಬೆಳಗಾವಿ ನಗರ ಪೊಲೀಸರು ಸಾಥ್ ನೀಡಿದ್ದಾರೆ.
ಬೆದರಿಕೆ ಕರೆಗಳ ವಿಷಯ ತಿಳಿದ ತಕ್ಷಣವೇ ನಾಗ್ಪುರ ಪೊಲೀಸರು ಸಚಿವ ನಿತಿನ್ ಗಡ್ಕರಿ ಕಚೇರಿಗೆ ಭದ್ರತೆ ಹೆಚ್ಚಿಸಿದ್ದಾರೆ.
ಗಡ್ಕರಿ ಅವರು ಪ್ರಸ್ತುತ ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ನಾಗ್ಪುರದಲ್ಲೇ ಇದ್ದಾರೆ. ಒಂದು ದಿನದ ಹಿಂದೆ ಅವರು ಗ್ರೇಟರ್ ನೋಯ್ಡಾದಲ್ಲಿ ಆಟೋ ಎಕ್ಸ್ಪೋ -2023ರ ಕಾರ್ಯಕ್ರಮ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸದ್ಯ ಬೆದರಿಕೆ ಕರೆಗಳು ಬಂದ ಕಾರಣದಿಂದಾಗಿ ನಾಗ್ಪುರದಲ್ಲಿ ಗಡ್ಕರಿ ಭಾಗವಹಿಸುವ ಕಾರ್ಯಕ್ರಮ ಸ್ಥಳದಲ್ಲೂ ಭದ್ರತೆ ಹೆಚ್ಚಿಸಲಾಗುವುದು ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.